ಕಾಲದಾಚೆಯ ತೀರ... ಹೊಳೆದದ್ದು ತಾರೆ, ಉಳಿದಿದ್ದು ಆಕಾಶ... ಮರಳಿನಂತ ಕನಸು, ಅಲೆಯಂತ ಮನಸು, ಹೀಗೆ ಸುಮ್ಮನೆ ಒಂದಿಷ್ಟು....
ನಿರಂತರ ಚಲನೆ-ನಿರಂತರ ಒಲುಮೆ-ತೆರೆ, ನೋಡಿದಷ್ಟೂ ದೂರ ತೀರ... ಸುಮ್ಮನಿರಲಾರದ ಮನಸಿಗೆ ಸಾಗರದಷ್ಟು ಕನಸು.....

ನವೋನ್ಮಾದ ಸ್ಪಂದನಕ್ಕಾಗಿ http://samudrateera.wordpress.com/

Thursday 25 April 2013

ಕಣ್ಮುಚ್ಚಿ ತವಕಿಸುವ ಜೀವೋನ್ಮಾದ


ದೇವಾಮೃತ ಗಂಗೆ//ರಘುನಂದನ ಕೆ.


ಕ್ಲಬ್ಬಿನಲಿ ಕವಿದ
ಮಬ್ಬು ಬೆಳಕಿನ ಮುಸುಕಿನಲ್ಲಿ
ಉನ್ಮಾದದ ಝಲಕು
ಮೂಲೆಯಲಿ ಒತ್ತಿ ನಿಂತವರ
ಸುತ್ತ ಸೆಂಟಿನ ಘಾಟು
ಬಣ್ಣ ಬಣ್ಣದ ಶೀಷೆಗಳಲ್ಲಿ
ಕಣ್ಮುಚ್ಚಿ ತವಕಿಸಿದೆ ಜೀವೋನ್ಮಾದ
ಇಲ್ಲಿ ಪರಿಮಳವೂ ಉಸಿರುಗಟ್ಟಿಸುತ್ತದೆ
ಬೆಳಕೂ ಕಪ್ಪಿಟ್ಟಿದೆ... 


ರಾತ್ರಿ ಪಾಳಿಯ ಬಡ ದೇಹಕ್ಕೂ
ದುಬಾರಿ ಸಿಗರೇಟೇ ಬೇಕು ಸುಡಲು
ನಗರ ವ್ಯಾಮೋಹದ ಕಿಡಿಯಲ್ಲಿ
ಹಳ್ಳಿಗಳೆಲ್ಲ ವೃದ್ಧರ ಗೂಡು-ಸುಡುಗಾಡು
ಇಲ್ಲ ಶಹರದಲಿ ತಾರೆಗಳ ಹೊಳಪು
ಇರುಳೆಲ್ಲ ಕೃತಕ ದೀಪಗಳ ಬಿಳುಪು

ನುಗ್ಗಿ ಬರುವ ಪತಂಗಗಳ
ಜೀವ ಭಾವ - ರೆಕ್ಕೆಗೆ ಬೆಂಕಿ,
ಕೆಂಪು ನೋಟೊಳಗೆ ಗಾಂಧಿಯ ನಗು
ಸುತ್ತಮುತ್ತೆಲ್ಲ ಗಾಂಧಾರಿಯ ಮಕ್ಕಳು

                               
ಅರ್ಥ ಮಾಡಿಸ ಹೊರಟ ಬುದ್ಧಿಜೀವಿಗಳ
ಮಾತಲ್ಲಿ ಅಪಾರ್ಥಗಳ ತಳುಕು
ಧರ್ಮ ಕರ್ಮಗಳ ವಿಪರೀತಾರ್ಥದಲ್ಲಿ
ನಶೆಯೇರಿದ ದಾನವತೆಯ ಕೊಳಕು
ಕಣ್ ಕತ್ತಲಿಟ್ಟಿದೆ ನಗರ-ಬೆಳಕು
ಕೊಳೆತ ಮನಸುಗಳ ಘಾಟು ಕಳೆಯಲು
ಶೀಷೆ ತುಂಬಿದ ದ್ರಾವಕಗಳ ಉನ್ಮಾದ
ಮುಖ ನೋಡಲಾರದ ಕಣ್ಗಳಿಗೆ
ಮುಖವಾಡಗಳ ಬಣ್ಣ ವಿಷಾದ...!!


ಚಿತ್ರಕೃಪೆ : ಅಂತರ್ಜಾಲ

 ಪಂಜು-ಅಂತರ್ಜಾಲ ಸಾಪ್ತಾಹಿಕ ಲ್ಲಿ 11.03.2013ರಂದು ಪ್ರಕಟಿಸಲ್ಪಟ್ಟಿದೆಪಂಜುವಿನ ಪುಟಗಳಲ್ಲಿ ಓದಲು  ಲಿಂಕ್ ಬಳಸಿ

(ಬಣ್ಣ ಚಿತ್ರಗಳಿಲ್ಲದ ಸಹಜ ಓದಿಗೆ  http://samudrateera.wordpress.com/ ಗೆ ಭೇಟಿ ನೀಡಿ)